ಬಂಟ್ವಾಳ: ಇಲ್ಲಿನ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬಂಟ್ವಾಳ ತಾಲೂಕು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ “ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2K26” ಕಾರ್ಯಕ್ರಮವು (ಆಗಸ್ಟ್ 11) ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ಹಿರಿಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು, “ಸವಿಸ್ಕಾರ್ 2K26 ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ, ನವೀನ ಚಿಂತನೆ ಹಾಗೂ ಆವಿಷ್ಕಾರದ ಮನೋಭಾವವನ್ನು ಬೆಳೆಸುತ್ತದೆ. ಜೊತೆಗೆ ಹೊಸ ಸಂಶೋಧನೆ ಹಾಗೂ ನವೀನ ಯೋಚನೆಗಳಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸುತ್ತದೆ. ಈ ಕಾರ್ಯಕ್ರಮವು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಹೊಸ ಆವಿಷ್ಕಾರಗಳಿಗೆ ದಾರಿದೀಪವಾಗಲಿ” ಎಂದು ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿ, ICMR Senior Research Fellow (SRF) ಹಾಗೂ PhD Scholar ಶ್ರೀ ರಾಮನಾರಾಯಣ ಭಟ್ ಅವರು ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು. “ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಸಮಯವನ್ನು ಮೀಸಲಿಟ್ಟಾಗ ಮಾತ್ರ ತಮ್ಮ ಗುರಿಯನ್ನು ಸುಲಭವಾಗಿ ತಲುಪಲು ಸಾಧ್ಯ” ಎಂದು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
109 ವಿದ್ಯಾರ್ಥಿಗಳ ಸಕ್ರಿಯ ಭಾಗಿತ್ವ:
ಬಂಟ್ವಾಳ ತಾಲೂಕಿನ ವಿವಿಧ 9 ವಿದ್ಯಾಸಂಸ್ಥೆಗಳಿಂದ ಒಟ್ಟು 109 ವಿದ್ಯಾರ್ಥಿಗಳು ಆಗಮಿಸಿ ಫೆಸ್ಟ್ನ ವಿವಿಧ ಸೃಜನಶೀಲ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಉಮೇಶ್ ಸಾಲಿಯಾನ್ ಹಾಗೂ ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ಉಪನ್ಯಾಸಕಿ ಶ್ರೀಮತಿ ನಂದ ಅವರು ಎಲ್ಲರನ್ನೂ ಸ್ವಾಗತಿಸಿದರು. ವಿದ್ಯಾರ್ಥಿನಿ ಕುಮಾರಿ ಮನಾಲಿ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಗೌತಮಿ ವಂದನಾರ್ಪಣೆ ಸಲ್ಲಿಸಿದರು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

