ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಹಾಡುವ ಅಥವಾ ಗಾಯನ ಮಾಡುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ನಡವಳಿ ಮತ್ತು ಆದೇಶವನ್ನು ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (DPAR) ರಾಜ್ಯಪಾಲರ ಆದೇಶಾನುಸಾರ ದಿನಾಂಕ 08.09.2026 ರಂದು ಈ ಆದೇಶವನ್ನು ಜಾರಿಗೆ ತಂದಿದೆ.
ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸುವ ಸಭಾ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು / ಗಾಯನ ಮಾಡಲು ಸೂಚಿಸಲಾಗಿದೆ. ರಾಷ್ಟ್ರಪತಿಗಳು, ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಅಧಿಕೃತ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ರಾಜ್ಯ ಸರ್ಕಾರಿ ಕಾರ್ಯಕ್ರಮಗಳಿಗೆ ಈ ನಿಯಮ ಅನ್ವಯವಾಗಲಿದೆ. (ಅತಿಗಣ್ಯರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಸಂಪೂರ್ಣ ಗೀತೆಯನ್ನು ಹಾಡಲಾಗುತ್ತದೆ).
ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ: ಆರ್ಎಸ್ಎಸ್ ವರ್ಸಸ್ ಕರ್ನಾಟಕ ಸರ್ಕಾರ: ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದ ಗೃಹ ಸಚಿವ
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ದೇಶಭಕ್ತಿ ಹಾಗೂ ಏಕತೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಪ್ರಮುಖ ಪಾತ್ರ ವಹಿಸಿತ್ತು. ಕೇಂದ್ರ ಗೃಹ ಸಚಿವಾಲಯದ ಮಾರ್ಗದರ್ಶಿ ಸೂತ್ರಗಳ ಅನ್ವಯ, ರಾಜ್ಯ ಸರ್ಕಾರಿ ಸಮಾರಂಭಗಳಲ್ಲಿ ಏಕರೂಪತೆ, ಗೌರವ ಹಾಗೂ ಶಿಷ್ಟಾಚಾರ ಕಾಯ್ದುಕೊಳ್ಳುವ ಉದ್ದೇಶದಿಂದ ಸಂಪುಟ ಸಭೆಯ ತೀರ್ಮಾನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.ಸಂದೀಪ್ ಬಿ.ಕೆ., ಸರ್ಕಾರದ ಅಧೀನ ಕಾರ್ಯದರ್ಶಿ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ-ರಾಜಕೀಯ) ಅವರ ಸಹಿಯೊಂದಿಗೆ ಈ ನಡವಳಿಗಳನ್ನು ಪ್ರಕಟಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

