ನೆಲಮಂಗಲ: ಜಿಂದಾಲ್ ಸಮೀಪ ಭಾನುವಾರ (ಫೆಬ್ರವರಿ 15) ಸಂಭವಿಸಿದ ಕೆಎಸ್ಆರ್ಟಿಸಿ ಬಸ್ ಮತ್ತು ಇಂಡಿಕಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ದೊಡ್ಡಬಳ್ಳಾಪುರ ಮೂಲದ ಹರ್ಷಿತ್ ಮತ್ತು ನಿಖಿತ್ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ತುಮಕೂರಿನಿಂದ ಹೆಚ್ಚಿನ ವೇಗದಲ್ಲಿ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಬೆಂಗಳೂರಿನತ್ತ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರಲ್ಲಿ ಹರ್ಷಿತ್ ಅವರು ರಾಜಾನಕುಂಟೆಯ ಸಾಯಿ ವಿದ್ಯಾ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದಾರೆ. ಭಾನುವಾರದ ರಜಾ ದಿನ ಸ್ನೇಹಿತರೊಂದಿಗೆ ಹೊರಟಿದ್ದ ಪ್ರಯಾಣ ದುರ್ಘಟನೆಯಾಗಿ ಅಂತ್ಯಗೊಂಡಿದೆ.
ಇದನ್ನೂ ಓದಿ: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಾಶವಾಗಿದ್ದು, ಮೃತದೇಹಗಳನ್ನು ಹೊರತೆಗೆದಲು ರಕ್ಷಣಾ ಸಿಬ್ಬಂದಿಗೆ ಸಾಕಷ್ಟು ಶ್ರಮ ವಹಿಸಬೇಕಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಸಾವನ್ನಪ್ಪಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರ ಗುರುತು ಪತ್ತೆ ಮಾಡುವ ಕಾರ್ಯ ಮುಂದುವರಿದಿದ್ದು, ಕುಟುಂಬಗಳಿಗೆ ಮಾಹಿತಿ ನೀಡಲಾಗುತ್ತಿದೆ. ಪ್ರಕರಣವನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

