ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ (ಮೇಲ್ಸೇತುವೆ) ಬಳಿ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘೋರ ಘಟನೆ ಬುಧವಾರ ನಡೆದಿದೆ. ರೈಲು ಹಳಿಗಳ ಬಳಿ ಕುಳಿತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕುಂಪಲ ಲಕ್ಷ್ಮಿಗುಡ್ಡೆ ನಿವಾಸಿ ಕಿರಣ್ (47) ಮೃತಪಟ್ಟವರು.
ಪ್ರಾಥಮಿಕ ವರದಿಗಳ ಪ್ರಕಾರ, ಕಿರಣ್ ಅವರು ರೈಲು ಹಳಿಗಳ ಸಮೀಪದಲ್ಲಿ ಕುಳಿತಿದ್ದರು. ಆ ಸಂದರ್ಭದಲ್ಲಿ ವೇಗವಾಗಿ ಬಂದ ರೈಲು ಅವರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಿರಣ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ: ಪುತ್ತೂರು: ದರ್ಬೆಯಲ್ಲಿ ನಡುರಸ್ತೆಯಲ್ಲೇ ಪಿಸ್ತೂಲ್ ತೋರಿಸಿ ದಮ್ಕಿ
ಘಟನಾ ಸ್ಥಳಕ್ಕೆ ಭವನ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕಿಸೆಯಲ್ಲಿದ್ದ ಮೊಬೈಲ್ ಫೋನ್ ಪೊಲೀಸರಿಗೆ ದೊರೆತಿದೆ. ಆ ಮೊಬೈಲ್ ಕರೆಗಳ ವಿವರ ಮತ್ತು ಮಾಹಿತಿಯ ಆಧಾರದ ಮೇಲೆ ಮೃತರ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಆಕಸ್ಮಿಕ ಅಪಘಾತವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

