ಮಂಡ್ಯ: ರಾಜ್ಯದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ದಂಪತಿಗಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಅದೇ ಕೋಣೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಪುಟ್ಟ ಹೆಣ್ಣು ಮಗುವನ್ನು ಪೊಲೀಸರು ರಕ್ಷಿಸಿದ್ದಾರೆ. ಮಗುವಿನ ಕುತ್ತಿಗೆಯ ಮೇಲೆ ಗಾಯದ ಗುರುತುಗಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ.
ಮನೆಯ ಒಳಭಾಗದಿಂದ ಬಾಗಿಲು ಹಾಕಿಕೊಂಡಿದ್ದ ದಂಪತಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಬಾಗಿಲು ಒಡೆದು ಒಳಗೆ ಹೋದಾಗ ಈ ದೃಶ್ಯ ಕಂಡುಬಂದಿದೆ.ದಂಪತಿ ಸಾವನ್ನಪ್ಪಿದ್ದ ಕೋಣೆಯಲ್ಲೇ ಎರಡು ವರ್ಷದ ಮಗು ಪತ್ತೆಯಾಗಿದೆ. ಮಗುವಿನ ಕುತ್ತಿಗೆಯ ಮೇಲೆ ಬಲವಾದ ಗಾಯದ ಗುರುತುಗಳಿದ್ದು, ದಂಪತಿಗಳು ಮಗುವನ್ನು ಕೊಲ್ಲಲು ಪ್ರಯತ್ನಿಸಿ ನಂತರ ತಾವು ಆತ್ಮಹತ್ಯೆ ಮಾಡಿಕೊಂಡಿರಬಹುದು ಅಥವಾ ಬೇರೆ ಯಾವುದಾದರೂ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರು: ರಿಯಲ್ ಎಸ್ಟೇಟ್ ಏಜೆಂಟ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮೃತನ ಸಂಬಂಧಿಯೇ ಹಂತಕ!
ತಕ್ಷಣವೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಮಗು ಚಿಕಿತ್ಸೆ ಪಡೆಯುತ್ತಿದೆ. ಮಗುವಿನ ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕುಟುಂಬದಲ್ಲಿ ಎದುರಾಗಿದ್ದ ತೀವ್ರ ಆರ್ಥಿಕ ಸಂಕಷ್ಟ ಅಥವಾ ಕೌಟುಂಬಿಕ ಕಲಹ ಈ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ (Suicide Note) ಪತ್ತೆಯಾಗಿರುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

