ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ನಡೆಸಲಾದ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದನ್ನು ಆಕ್ಷೇಪಿಸಿ ಪುತ್ತೂರು ನಗರ ಮಂಡಲದ ಬಿಜೆಪಿ ಮಹಿಳಾ ಮೋರ್ಚಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯವರಿಗೆ ದೂರು ನೀಡಿದೆ.
ಮಾರ್ಚ್ 8 ರಂದು ದೇವಸ್ಥಾನದ ನಟರಾಜ ವೇದಿಕೆಯಲ್ಲಿ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜಕೀಯ ಚಟುವಟಿಕೆಗಳು ನಡೆದಿವೆ ಮತ್ತು ಅನ್ಯಧರ್ಮದ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂಬುದು ಬಿಜೆಪಿ ಮಹಿಳಾ ಮೋರ್ಚಾದ ಪ್ರಮುಖ ಆರೋಪವಾಗಿದೆ.

“ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಕಾಯ್ದೆ 1997” ರ ಪ್ರಕಾರ ದೇವಸ್ಥಾನದ ಆಸ್ತಿ ಮತ್ತು ಕಟ್ಟಡಗಳನ್ನು ಕೇವಲ ಧಾರ್ಮಿಕ ಉದ್ದೇಶಗಳಿಗೆ ಮಾತ್ರ ಬಳಸಬೇಕು. ಆದರೆ ಕಾಂಗ್ರೆಸ್ ಇಲ್ಲಿ ರಾಜಕೀಯ ಕಾರ್ಯಕ್ರಮ ನಡೆಸಿ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.
ದೇವಸ್ಥಾನದ ಪವಿತ್ರ ಆವರಣದಲ್ಲಿ ರಾಜಕೀಯ ಮಾಡುವುದು ಭಕ್ತರ ಭಾವನೆಗಳಿಗೆ ಧಕ್ಕೆ ತರುತ್ತದೆ. ಅಲ್ಲದೆ, ಈ ಕಾರ್ಯಕ್ರಮದಲ್ಲಿ ಅನ್ಯಧರ್ಮೀಯರ ಸಹಭಾಗಿತ್ವವು ದೇವಸ್ಥಾನದ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಪುತ್ತೂರು ಫುಡ್ ಫೆಸ್ಟ್ಗೂ ತಟ್ಟಿದ ಗ್ಯಾಸ್ ಕಂಟಕ: ಸಿಲಿಂಡರ್ ಅಭಾವದಿಂದ ಆಹಾರ ಉತ್ಸವ ಮುಂದೂಡಿಕೆ!
ಈ ಘಟನೆಯ ಬಗ್ಗೆ ತಕ್ಷಣ ತನಿಖೆ ನಡೆಸಿ, ದೇವಸ್ಥಾನದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಇನ್ನು ಮುಂದೆ ಇಂತಹ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಪುತ್ತೂರು ನಗರ ಮಂಡಲದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವರ್ಣಲತಾ ಹೆಗಡೆ ಒತ್ತಾಯಿಸಿದ್ದಾರೆ.
ಬಿಜೆಪಿ ಮಹಿಳಾ ಮೋರ್ಚಾ ಈ ದೂರಿನ ಪ್ರತಿಯನ್ನು ಮಂಗಳೂರಿನ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಹಾಯ ಆಯುಕ್ತರಿಗೂ ರವಾನಿಸಿದೆ. 7 ದಿನಗಳ ಒಳಗಾಗಿ ಈ ಬಗ್ಗೆ ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಗಡುವು ನೀಡಲಾಗಿದೆ.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಕಾರ್ಯದರ್ಶಿ ಜಯಲಕ್ಷ್ಮಿ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿಬಿ, ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್ , ಓಬಿಸಿ ಮೋರ್ಚಾ ಅಧ್ಯಕ್ಷ ನಿರಂಜನ್ ಮಾನ್ಯ, ಶಕ್ತಿಕೇಂದ್ರ ಅಧ್ಯಕ್ಷ ನಾಗೇಂದ್ರ ಬಾಳಿಗ ,ಗ್ರಾಮಾಂತರ ಮಂಡಲ ಉಪಾಧ್ಯಕ್ಷ ನಾಗೇಶ್, ಕಾರ್ಯಕರ್ತ ರವಿ ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

