ಬಂಟ್ವಾಳ: ತಾಲೂಕಿನ ಮಂಚಿ-ಕೊಳ್ನಾಡು ಪ್ರೌಢಶಾಲೆಯು ಕರ್ನಾಟಕ ಸರಕಾರದ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ಡಿಎಂಸಿ (ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ) ಪ್ರಶಸ್ತಿಗೆ ಆಯ್ಕೆಯಾಗಿದೆ.
ಶಾಲೆಯ ಭೌತಿಕ ಸೌಕರ್ಯಗಳ ಅಭಿವೃದ್ಧಿ, ಶೈಕ್ಷಣಿಕ ಪ್ರಗತಿ ಹಾಗೂ ಒಟ್ಟಾರೆ ಸರ್ವತೋಮುಖ ಬೆಳವಣಿಗೆಗಳನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ತಾಲೂಕು ಮತ್ತು ಜಿಲ್ಲಾ ಶಿಕ್ಷಣಾಧಿಕಾರಿಗಳ ತಂಡಗಳು, ಜೊತೆಗೆ ಆಯ್ದ ಹತ್ತು ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರಿಂದ ಬಂದ ಮೆಚ್ಚುಗೆ ವರದಿಗಳ ಆಧಾರದ ಮೇಲೆ ಈ ಆಯ್ಕೆ ನಡೆದಿದೆ.


ಈ ಪ್ರಶಸ್ತಿಯೊಂದಿಗೆ ₹1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಶಾಲೆಗೆ ನೀಡಲಾಗುತ್ತದೆ. ಈ ಸಾಧನೆಯು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳಲ್ಲಿ ಅಪಾರ ಸಂತಸವನ್ನುಂಟುಮಾಡಿದೆ.
ಇದನ್ನೂ ಓದಿ: ಮೋಂತಿಮಾರು ಶ್ರೀ ಕ್ಷೇತ್ರದಲ್ಲಿ ಮಾ.23ರಿಂದ ವಾರ್ಷಿಕ ಜಾತ್ರಾ ಮಹೋತ್ಸವ, ಜೈ ಹನುಮಾನ್ ಸಿನಿ ನಾಟಕ ಪ್ರದರ್ಶನ
ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಶಂಕರ್ ರಾವ್ ಮಂಚಿ, ಮುಖ್ಯೋಪಾಧ್ಯಾಯರಾದ ಸುಶೀಲಾ ವಿಟ್ಲ ಹಾಗೂ ಸಮಿತಿಯ ಎಲ್ಲಾ ಸದಸ್ಯರುಗಳ ಪರಿಶ್ರಮವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಇದೇ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪೋಷಕರ ಸಹಕಾರವೂ ಶಾಲೆಯ ಅಭಿವೃದ್ಧಿಗೆ ಮಹತ್ವದ ಪಾತ್ರವಹಿಸಿದೆ ಎಂದು ಶಾಲಾ ವೃಂದವು ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

