ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಕಾಣಿಸದಿರುವ ಬಗ್ಗೆ ಉಂಟಾದ ಚರ್ಚೆಗಳಿಗೆ ತೆರೆ ಎಳೆದ ಮಾಜಿ ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ಚುನಾವಣೆಗೆ ಸ್ಪರ್ಧಿಸದ ನಿರ್ಧಾರ ತನ್ನದೇ ಎಂದು ಸ್ಪಷ್ಟಪಡಿಸಿದ್ದಾರೆ.
ಕೊಯಮತ್ತೂರಿನಿಂದ ಚೆನ್ನೈಗೆ ಆಗಮಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಕೋರ್ ಸಮಿತಿಗೆ ಮುಂಚಿತವಾಗಿ ಲಿಖಿತವಾಗಿ ತಿಳಿಸಿದ್ದೇನೆ. ಹೀಗಾಗಿ ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂಬ ಮಾತು ಸರಿಯಲ್ಲ” ಎಂದು ಹೇಳಿದರು.

ತಮ್ಮ ಗೈರುಹಾಜರಿಯ ಬಗ್ಗೆ ಮೂಡಿದ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಅಣ್ಣಾಮಲೈ, “ನಾನು ಸ್ಪರ್ಧಿಸಲು ಇಚ್ಛಿಸದಿದ್ದಾಗ ಪಕ್ಷದ ನಾಯಕತ್ವ ನನಗೆ ಟಿಕೆಟ್ ಹೇಗೆ ನೀಡುತ್ತದೆ?” ಎಂದು ಪ್ರಶ್ನಿಸಿದರು. ಈ ವಿಷಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆ ಸ್ಪಷ್ಟನೆ ನೀಡುತ್ತಿರುವುದಾಗಿ ಹೇಳಿದರು.
ಇದನ್ನೂ ಓದಿ: ತಮಿಳುನಾಡು ಚುನಾವಣೆ 2026: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಅಣ್ಣಾಮಲೈ ಹೆಸರಿಲ್ಲ!

ಪಕ್ಷದ ಕೇಂದ್ರ ನಾಯಕತ್ವ ತಮ್ಮ ನಿರ್ಧಾರವನ್ನು ಗೌರವಿಸಿರುವುದಕ್ಕೆ ಧನ್ಯವಾದ ತಿಳಿಸಿದ ಅವರು, ರಾಜ್ಯದಲ್ಲಿ ಎನ್ಡಿಎ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಹೇಳಿದರು.
ಇದಕ್ಕೂ ಮುನ್ನ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅಣ್ಣಾಮಲೈ ಹೆಸರು ಕಾಣಿಸದಿರುವುದು ಪ್ರಮುಖ ಚರ್ಚೆಯ ವಿಷಯವಾಗಿತ್ತು. ಅವರ ಹೆಸರು ಕೊಯಮತ್ತೂರು ಭಾಗದ ಕ್ಷೇತ್ರಗಳಿಗೆ ಸಂಬಂಧಿಸಿ ಕೇಳಿಬಂದಿತ್ತು.

ಅಣ್ಣಾಮಲೈ ಬೇಸರಕ್ಕೆ ಕಾರಣವೇನು?
ಆದರೆ, ಮೂಲಗಳ ಪ್ರಕಾರ ಸೀಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಅಣ್ಣಾಮಲೈ, ವಿಶೇಷವಾಗಿ ಕೊಯಮತ್ತೂರಿನ ಪ್ರಮುಖ ಕ್ಷೇತ್ರಗಳನ್ನು ಎಐಎಡಿಎಂಕೆ ಉಳಿಸಿಕೊಂಡಿದ್ದರಿಂದ ಬೇಸರಗೊಂಡಿದ್ದರು ಎನ್ನಲಾಗಿದೆ. ಸಿಂಗನಲ್ಲೂರು ಕ್ಷೇತ್ರವನ್ನು ಬಿಜೆಪಿಗೆ ನೀಡುವಂತೆ ಅವರು ಒತ್ತಾಯಿಸಿದ್ದರೂ ಅದು ಸಾಧ್ಯವಾಗಲಿಲ್ಲ ಎಂಬ ಮಾಹಿತಿಯಿದೆ.
ರಾಜಕೀಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

