ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಸರ್ಕಾರ ಮಾಡಿಕೊಂಡಿರುವ ಒಪ್ಪಂದ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಡಿವೈಎಫ್ಐ (DYFI) ಸಂಘಟನೆಯು ಇಂದು ಪ್ರತಿಭಟನಾ ಮೆರವಣಿಗೆ ಮತ್ತು ‘ಸಚಿವ ಕಚೇರಿ ಚಲೋ’ ಹಮ್ಮಿಕೊಂಡಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಉಸ್ತುವಾರಿ ಜಿಲ್ಲೆಯಲ್ಲಿ ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗಿದೆ. ಎ.ಜೆ. ಮೆಡಿಕಲ್ ಕಾಲೇಜು, ಆಳ್ವಾಸ್ ಮತ್ತು ಯೆನಪೋಯಾ ವೈದ್ಯಕೀಯ ಕಾಲೇಜುಗಳ ಜೊತೆ ಸರ್ಕಾರ ಒಂದು ವರ್ಷದ ಒಪ್ಪಂದ ಮಾಡಿಕೊಂಡಿದೆ.

ಮೊದಲ ಹಂತವಾಗಿ ಬಂಟ್ವಾಳ, ಬೆಳ್ತಂಗಡಿ ತಾಲೂಕಾಸ್ಪತ್ರೆಗಳು ಹಾಗೂ ಮೂಡಬಿದಿರೆ ಮತ್ತು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಸಗಿ ಕಾಲೇಜುಗಳ ಸಹಯೋಗದೊಂದಿಗೆ ವೈದ್ಯಕೀಯ ಸೇವೆ ನೀಡಲು ಅನುಮೋದನೆ ನೀಡಲಾಗಿದೆ.
ಪ್ರತಿಭಟನೆಗೆ ಕಾರಣವೇನು?

“ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆರೋಗ್ಯ ವ್ಯಾಪಾರಿಗಳ ಮಡಿಲಿಗೆ ಹಾಕುವ ಹುನ್ನಾರ ಇದು” ಎಂದು DYFI ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರಿ ವ್ಯವಸ್ಥೆಯನ್ನು ಬಲಪಡಿಸುವ ಬದಲು ಖಾಸಗಿಯವರಿಗೆ ವಹಿಸಿಕೊಡುವುದು ಬಡ ರೋಗಿಗಳಿಗೆ ಮಾರಕವಾಗಲಿದೆ ಎಂದು ಸಂಘಟನೆ ವಾದಿಸಿದೆ.
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಿಂದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದವರೆಗೆ (ಉಸ್ತುವಾರಿ ಸಚಿವರ ಕಚೇರಿ) ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಸಚಿವರ ಕಚೇರಿ ಚಲೋ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ನಗರ ಪೊಲೀಸರು ಪ್ರತಿಭಟನಾ ಸ್ಥಳ ಮತ್ತು ಜಿಲ್ಲಾಧಿಕಾರಿ ಕಚೇರಿ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮಾನ ಮನಸ್ಕ ಸಂಘಟನೆಗಳು ಕೂಡ ಈ ಹೋರಾಟಕ್ಕೆ ಬೆಂಬಲ ಸೂಚಿಸಿವೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

