Breaking News

ಹುಬ್ಬಳ್ಳಿ ಘಟನೆ ಸಿಐಡಿ ಹೆಗಲಿಗೆ ಒಪ್ಪಿಸಲು ಚಿಂತನೆ : ಜಿ.ಪರಮೇಶ್ವರ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ವಿವಾದಾತ್ಮಕ ಘಟನೆಯ ತನಿಖೆಯನ್ನು ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್‌ಮೆಂಟ್ (CID) ಗೆ ವಹಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಈ ಪ್ರಕರಣವನ್ನು ಸಿಐಡಿಗೆ ವಹಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸುತ್ತಿದ್ದೇನೆ. ಸತ್ಯ ಹೊರಬರಬೇಕು. ಸತ್ಯ ಹೊರತರಲು ನಾವು ಏನು ಮಾಡಬೇಕು ಎಂಬುದು ನಮಗೆ ಗೊತ್ತಿದೆ,” ಎಂದು ಹೇಳಿದರು.

Advertisement

ಈ ಘಟನೆ ರಾಜ್ಯದ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ತನಿಖೆ ಇನ್ನೂ ಮುಂದುವರಿದಿದೆ. ಸತ್ಯಾಂಶಗಳನ್ನು ಹೊರತೆಗೆದು ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

ಈ ಹಿಂದೆ ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನು ಪೊಲೀಸ್ ವ್ಯಾನ್‌ನಲ್ಲಿ ವಿವಸ್ತ್ರಗೊಳಿಸಲಾಗಿದೆ ಎಂಬ ಆರೋಪವನ್ನು ತೀವ್ರವಾಗಿ ಖಂಡಿಸಿದರು. ಈ ಘಟನೆ ಕರ್ನಾಟಕದ ಮಹಿಳೆಯರಿಗೆ ಮಾಡಿದ ಅವಮಾನ. ತಕ್ಷಣವೇ ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕು. ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯಲಿ. ಸಂಬಂಧಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಇತರ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಇಲ್ಲದಿದ್ದರೆ ನಾನು ಸ್ವತಃ ಹುಬ್ಬಳ್ಳಿಗೆ ತೆರಳಿ ಹೋರಾಟ ನಡೆಸುತ್ತೇನೆ, ಎಂದು ಅವರು ಹೇಳಿದರು.

ಆರೋಪಗಳನ್ನು ತಳ್ಳಿ ಹಾಕಿದ ಪೊಲೀಸರು ;
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವಿವಾದದ ವೇಳೆ ಬಂಧನ ಸಮಯದಲ್ಲಿ ಮಹಿಳೆಯನ್ನು ಹಲ್ಲೆ ಮಾಡಿ ವಿವಸ್ತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.
ಆದರೆ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಈ ಆರೋಪಗಳನ್ನು ನಿರಾಕರಿಸಿದ್ದಾರೆ.
ಜೊತೆಗೆ, 8–10 ಮಹಿಳಾ ಪೊಲೀಸ್ ಸಿಬ್ಬಂದಿ ಆಕೆಯನ್ನು ಬಂಧಿಸುತ್ತಿದ್ದಾಗ, ಆಕೆ ತಾನೇ ಬಟ್ಟೆಗಳನ್ನು ತೆಗೆದು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ನಮ್ಮ ಸಿಬ್ಬಂದಿ ಆಕೆಗೆ ಬೇರೆ ಬಟ್ಟೆ ತರಿಸಿ ಹಾಕಿಸಿದ್ದಾರೆ, ಎಂದು ಅವರು ಹೇಳಿದರು. ಆ ಮಹಿಳೆಯ ವಿರುದ್ಧ ಒಟ್ಟು 9 ಪ್ರಕರಣಗಳು ದಾಖಲಾಗಿವೆ, ಅದರಲ್ಲಿ ಈ ವರ್ಷದಲ್ಲೇ 4 ಪ್ರಕರಣಗಳಿವೆ ಎಂದು ತಿಳಿಸಿದರು. ವಿಡಿಯೋ ಹರಡುವುದೇ ಅಪರಾಧವಾಗಿದ್ದು, ಅದನ್ನು ದಾಖಲಿಸಿ ಹಂಚಿದವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಕೈಗೊಳ್ಳಲಾಗುವುದು ಎಂದರು. ಡಿಸಿಪಿಗೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡು, “ಆ ಮಹಿಳೆ ಬಂಧನದ ವೇಳೆ ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಚ್ಚಿದ್ದಾಳೆ ಮತ್ತು ತಾನೇ ಬಟ್ಟೆ ತೆಗೆದಿದ್ದಾಳೆ. ಅಲ್ಲಿ 10 ಮಹಿಳಾ ಪೊಲೀಸ್ ಸಿಬ್ಬಂದಿ ಇದ್ದರು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು; ತೆಗೆದುಕೊಂಡರೆ ಕಾನೂನು ಕ್ರಮ ಅನಿವಾರ್ಯ,” ಎಂದು ಹೇಳಿದರು.

ಇದನ್ನೂ ಓದಿ : ಪುತ್ತೂರಿನಲ್ಲಿ ಉದ್ಘಾಟನೆಗೊಂಡ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ-ಸಸ್ಯ ಜಾತ್ರೆ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು