ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ದಿಡುಪೆ ಜಲಪಾತದಲ್ಲಿ (Didupe Falls) ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ನಡೆದಿದೆ. ಕೃತ್ಯ ಎಸಗಿದ ಮೂವರು ಆರೋಪಿಗಳನ್ನು ಸ್ಥಳೀಯ ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಬೆಳ್ತಂಗಡಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳದ ಕಾಸರಗೋಡು ಮೂಲದ ಅಬ್ದುಲ್ ಖಾದರ್ (36), ಫೈಜಲ್ ಆದಿಲ್ (27) ಮತ್ತು ಉಸ್ಮಾನ್ ಸಲೀಂ (18) ಎಂದು ಗುರುತಿಸಲಾಗಿದೆ. ಆರೋಪಿಗಳು ಅನ್ಯಕೋಮಿನ ಯುವತಿಯರನ್ನು ದಿಡುಪೆ ಜಲಪಾತಕ್ಕೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ.
ಜಲಪಾತದಲ್ಲಿ ನೀರಾಟ ಆಡುವ ಸಂದರ್ಭದಲ್ಲಿ ಆರೋಪಿಗಳು ಓರ್ವ ಯುವತಿಗೆ ಲೈಂಗಿಕವಾಗಿ ಕಿರುಕುಳ ನೀಡಲು ಯತ್ನಿಸಿದ್ದಾರೆ. ಇದರಿಂದ ಆಘಾತಕ್ಕೊಳಗಾದ ಯುವತಿ ಜೋರಾಗಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಕಿರುಚಾಟ ಕೇಳಿ ತಕ್ಷಣವೇ ಧಾವಿಸಿದ ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರು ಯುವತಿಯನ್ನು ಕಾಮುಕರಿಂದ ರಕ್ಷಿಸಿದ್ದಾರೆ. ಅಷ್ಟೇ ಅಲ್ಲದೆ, ಗಲಾಟೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರೂ ಯುವಕರನ್ನು ಸ್ಥಳೀಯರು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇದನ್ನೂ ಓದಿ:ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಹೈಡ್ರಾಮಾ: ನಡುರಸ್ತೆಯಲ್ಲೇ ವ್ಯಕ್ತಿಯ ಬೀದಿ ರಂಪಾಟ
ಸಂತ್ರಸ್ತ ಯುವತಿ ನೀಡಿದ ಅಧಿಕೃತ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರವಾಸಿ ತಾಣದಲ್ಲಿ ನಡೆದಿರುವ ಈ ಘಟನೆ ಸ್ಥಳೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


