ಬಂಟ್ವಾಳ: ತಾಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ.31 ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ಈ ವೇಳೆ ಮಾತನಾಡಿದ ಶ್ರೀರಾಮ ವಿದ್ಯಾ ಕೇಂದ್ರದ ಸ್ಥಾಪಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವುದರ ಜೊತೆಗೆ ಮುಂದಿನ ಸಾಧನೆಗೆ ದಾರಿದೀಪವಾಗಿದೆ ಎಂದರು. ಅದೇ ರೀತಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಮಾತನಾಡಿ, ವಿದ್ಯಾರ್ಥಿಗಳು ಉತ್ತಮವಾದ ಸಾಧನೆಯನ್ನು ಮಾಡಿದಾಗ ಮುಂದಿನ ಜೀವನ ಉತ್ತಮವಾಗಿರುತ್ತದೆ ಎಂದು ನುಡಿದರು.

ಬೆಂಗಳೂರಿನ ಎನ್.ಎ.ಎಲ್ನ ನಿವೃತ್ತ ಹಿರಿಯ ವಿಜ್ಞಾನಿ ಡಾ.ಆರ್.ರಾಮಚಂದ್ರರಾವ್ ಮಾತನಾಡಿ, ವಿಜ್ಞಾನ ಎನ್ನುವ ವಿಷಯವನ್ನು ಕನ್ನಡದಲ್ಲಿ ಓದಿ ಅರ್ಥಪೂರ್ಣವಾಗಿ ತಿಳಿಯಬಹುದು ಎಂದರು.
ವಾಮದಪದವು ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಚಂದ್ರಶೇಖರ ಶೆಟ್ಟಿ, ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕ ವಸಂತ ಮಾಧವ, ಶ್ರೀರಾಮ ವಿದ್ಯಾ ಕೇಂದ್ರದ ಸದಸ್ಯ ನಾಗೇಶ್, ಕೋಶಾಧಿಕಾರಿ ಸತೀಶ್ ಭಟ್ ಶಿವಗಿರಿ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯೆ ಲಕ್ಷ್ಮೀ ರಘುರಾಜ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೇಯಾ ಸ್ವಾಗತಿಸಿ, ಕುಮಾರಿ ಪುಣ್ಯಕೀರ್ತಿ ವಂದಿಸಿದರು. ಉಪನ್ಯಾಸಕಿ ಕು.ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

