ರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್‌ವೇ ನಿಯಮ ಉಲ್ಲಂಘಿಸಿ ಬಂದ ಬೈಕ್; ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಪುತ್ತೂರು ನಿವಾಸಿ ಅಶೋಕ್ ದಾರುಣ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಮತ್ತು ಕಲ್ಲಡ್ಕ ನಡುವಿನ ನರಹರಿ ಪರ್ವತದ ಮುಂಭಾಗದಲ್ಲಿ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘೋರ ದುರಂತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಪುತ್ತೂರಿನ ಕೊಡಿಪ್ಪಾಡಿ ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ.

ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಬಿಳಿ ಬಣ್ಣದ ಕಾರು (ನೋಂದಣಿ ಸಂಖ್ಯೆ: KA-21-C-4128) ಬಿ.ಸಿ. ರೋಡ್ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ವನ್ ವೇಯ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

Advertisement

ಹೆದ್ದಾರಿಯಲ್ಲಿ ಏಕಮುಖ ಸಂಚಾರ (ಒನ್‌ವೇ) ವ್ಯವಸ್ಥೆ ಜಾರಿಯಲ್ಲಿದ್ದರೂ, ಬೈಕ್ ಸವಾರ ನಿಯಮ ಗಾಳಿಗೆ ತೂರಿ ಸಂಚರಿಸಿದ್ದೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಬಾನೆಟ್, ಗ್ರಿಲ್ ಹಾಗೂ ಇಂಜಿನ್ ಭಾಗ ಸಂಪೂರ್ಣ ಹಾನಿಗೊಳಗಾಗಿದ್ದು, ಮುಂಭಾಗದ ವಿಂಡ್‌ಶೀಲ್ಡ್ ಗ್ಲಾಸ್ ಪುಡಿಪುಡಿಯಾಗಿದೆ. ಇದರೊಂದಿಗೆ ಬೈಕ್‌ನ ಮುಂಭಾಗವೂ ಸಂಪೂರ್ಣವಾಗಿ ನುಜ್ಜುನುಜ್ಜಾಗಿದೆ.

ಇದನ್ನೂ ಓದಿ: ಬಂಟ್ವಾಳದಲ್ಲಿ ಭೀಕರ ದುರಂತ: ಶೆಡ್ ನಿರ್ಮಿಸುವಾಗ ವಿದ್ಯುತ್ ತಂತಿಗೆ ತಗುಲಿದ ಕಬ್ಬಿಣದ ಪೈಪ್; 58 ವರ್ಷದ ವ್ಯಕ್ತಿ ವಿದ್ಯುತ್ ಆಘಾತದಿಂದ ಸಾವು

ಅಪಘಾತ ನಡೆದ ತಕ್ಷಣವೇ ಸ್ಥಳೀಯರು ಗಾಯಾಳು ಅಶೋಕ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ, ಅವರ ಸ್ಥಿತಿ ಗಂಭೀರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *