ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುವ ರೀತಿಯ ಕಾಮೆಂಟ್ನ್ನು ಪ್ರಕಟಿಸಿದ ಆರೋಪದಡಿ ಬೆಂಗಳೂರಿನ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, “Sanathani Simha” ಎಂಬ ಫೇಸ್ಬುಕ್ ಪುಟದಲ್ಲಿ ಪ್ರಕಟವಾದ ಪೋಸ್ಟ್ಗೆ ಆರೋಪಿಯು ಕೋಮು ಭಾವನೆಗಳನ್ನು ಕೆರಳಿಸುವ ಹಾಗೂ ಸಾರ್ವಜನಿಕ ಶಾಂತಿ ಕದಡುವ ಸಾಧ್ಯತೆಯಿರುವ ಕಾಮೆಂಟ್ ಮಾಡಿದ್ದನು.

ಈ ಕುರಿತು ದೂರು ದಾಖಲಾಗುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2025ರ ಸೆಪ್ಟೆಂಬರ್ 18ರಂದು ಅಪರಾಧ ಸಂಖ್ಯೆ 131/2025ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.
ಸುದೀರ್ಘ ತನಿಖೆಯ ಬಳಿಕ ಆರೋಪಿಯನ್ನು ಬೆಂಗಳೂರಿನ ವಿದ್ಯಾಮಾನ್ಯ ನಗರ ನಿವಾಸಿ ಆನಂದ್ ಎ. ಎಂದು ಗುರುತಿಸಿ, ಜೂನ್ 27, 2026ರಂದು ಬಂಧಿಸಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಜಿಟಲ್ ಸಾಕ್ಷ್ಯಾಧಾರಗಳು ಹಾಗೂ ಆರೋಪಿಯ ಹಿಂದಿನ ಪ್ರಕರಣಗಳ ಪರಿಶೀಲನೆಯ ಆಧಾರದ ಮೇಲೆ ಬಂಧನ ಕ್ರಮ ಕೈಗೊಳ್ಳಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

