ಬೆಂಗಳೂರು: ನಗರದಲ್ಲಿ ಮದ್ಯದ ಅಮಲಿನಲ್ಲಿ ಯುವತಿಯರು ಸಾರ್ವಜನಿಕವಾಗಿ ರಂಪಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಹುಳಿಮಾವು ಪ್ರದೇಶದಲ್ಲಿ ಮದ್ಯಪಾನ ಮಾಡಿಕೊಂಡಿದ್ದ ಇಬ್ಬರು ಯುವತಿಯರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕ್ಯಾಬ್ಗೆ ಡಿಕ್ಕಿ ಹೊಡೆದು ಗದ್ದಲ ಸೃಷ್ಟಿಸಿದ್ದಾರೆ.
ಡಿಕ್ಕಿ ಹೊಡೆದ ಹಿನ್ನೆಲೆ ಕ್ಯಾಬ್ ಚಾಲಕ ಅಹ್ಮದ್ ಈ ಬಗ್ಗೆ ಪ್ರಶ್ನಿಸಿ ಪರಿಹಾರ ನೀಡುವಂತೆ ಕೋರಿದ್ದಾರೆ. ಆದರೆ, ಯುವತಿಯರು ಆತನೊಂದಿಗೆ ವಾಗ್ವಾದ ನಡೆಸಿ ಹಲ್ಲೆ ಮಾಡಲು ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರು ಮಧ್ಯಪ್ರವೇಶಿಸಿ ಅವರನ್ನು ಹಿಡಿದಿದ್ದಾರೆ.

ಯುವತಿಯರ ವರ್ತನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಹುಳಿಮಾವು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಆದರೆ ಪೊಲೀಸರ ಎದುರಲ್ಲಿಯೂ ಯುವತಿಯರ ಹೈಡ್ರಾಮಾ ಮುಂದುವರಿದಿತ್ತು ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಮಹಿಳೆಯೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ ಬ್ಯಾಗ್ನ್ನು ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರು
ಜೆ.ಪಿ.ನಗರ ಮತ್ತು ಕೋರಮಂಗಲ ನಿವಾಸಿಗಳಾದ ಲೀಸಾ ಮತ್ತು ಮ್ಯಾಥ್ಯೂ ಎಂಬ ಇಬ್ಬರು ಯುವತಿಯರು ಸ್ನೇಹಿತರೊಂದಿಗೆ ಹೋಟೆಲ್ಗೆ ತೆರಳಿ ಮದ್ಯಪಾನ ಮಾಡಿಕೊಂಡು ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.
ಕ್ಯಾಬ್ಗೆ ಹಿಂದಿನಿಂದ ಸ್ಕೂಟಿ ಡಿಕ್ಕಿ ಹೊಡೆದ ಬಳಿಕ ಪರಾರಿಯಾಗಲು ಯತ್ನಿಸಿದ್ದು, ಇದನ್ನು ಪ್ರಶ್ನಿಸಿದ ಸ್ಥಳೀಯರ ಜೊತೆಯೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಸಾರ್ವಜನಿಕ ಶಾಂತಿಗೆ ಧಕ್ಕೆ ತಂದ ಆರೋಪದ ಮೇಲೆ ಇಬ್ಬರು ಯುವತಿಯರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮತ್ತಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

