ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಸುಪ್ರೀಂಕೋರ್ಟ್ನಲ್ಲೂ ಹಿನ್ನಡೆಯಾಗಿದೆ. ನೀವು ಜನಪ್ರತಿನಿಧಿಯಾಗಿರುವುದರಿಂದ ತನಿಖೆ ಎದುರಿಸುವ ಧೈರ್ಯ ಇರಬೇಕು ಎಂದು ಹೇಳಿದ ಸುಪ್ರೀಂಕೋರ್ಟ್, ನಿರೀಕ್ಷಣ ಜಾಮೀನು ನೀಡಲು ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠ, ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೇ ಸ್ವೀಕರಿಸಲಿಲ್ಲ. ಬದಲಿಗೆ, ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತು. “ನೀವು ಸಾರ್ವಜನಿಕ ವ್ಯಕ್ತಿ. ವಿಚಾರಣೆಯನ್ನು ಎದುರಿಸುವ ಧೈರ್ಯ ಇರಬೇಕು,” ಎಂದು ಮುಖ್ಯ ನ್ಯಾಯಮೂರ್ತಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಅವರನ್ನು ಕಳೆದ ವರ್ಷ ಜುಲೈ 15ರಂದು ಅವರ ಮನೆಯ ಮುಂದೆ ಗುಂಪೊಂದು ಹತ್ಯೆ ಮಾಡಿತ್ತು. ಭೂ ವಿವಾದವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರ ಹೆಸರು ಸಹ ಆರೋಪಪಟ್ಟಿಯಲ್ಲಿ ಸೇರಿದೆ.
ಇದಕ್ಕೂ ಮುನ್ನ ಕರ್ನಾಟಕ ಹೈಕೋರ್ಟ್ ಕೂಡ ನಿರೀಕ್ಷಣ ಜಾಮೀನು ಅರ್ಜಿ ವಜಾಗೊಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ನಿರಾಕರಣೆಯ ನಂತರ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಶಾಸಕರ ಬಂಧನಕ್ಕೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

