ಸ್ಯಾನ್ ಫ್ರಾನ್ಸಿಸ್ಕೊ: ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದಾಗಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ದೃಢಪಡಿಸಿದೆ. ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹವನ್ನು ಸ್ಥಳೀಯ ಪೊಲೀಸರು ಪತ್ತೆಹಚ್ಚಿರುವುದಾಗಿ ಕಾನ್ಸುಲೇಟ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೆ, ಮೃತನ ಕುಟುಂಬದವರಿಗೆ ಸಂತಾಪ ಸೂಚಿಸಿದೆ.
ಮೃತದೇಹವನ್ನು ಭಾರತಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ಸಂಬಂಧಿತ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ತಿಳಿಸಲಾಗಿದೆ. ಕಾನ್ಸುಲರ್ ಅಧಿಕಾರಿಗಳು ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳಲ್ಲಿ ಸಹಾಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರು: ವೈಟ್ ಆಟೋದಲ್ಲಿ ಬಂದಿಳಿದ ಕಾರ್ಲ್ ಪೀ! ಟೆಕ್ ಹಬ್ನಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ ಕಂಪನಿ!
ಸಾಕೇತ್ ಶ್ರೀನಿವಾಸಯ್ಯ ಅವರು ಅಮೆರಿಕದ ಕ್ಯಾಲಿಫೋರ್ನಿಯಾದ ಯುಸಿ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದರು. ಅವರು ಫೆಬ್ರವರಿ 12 ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು. ಕುಟುಂಬದವರ ಹಾಗೂ ಮನೆ ಸಹವಾಸಿಗಳ ಮಾಹಿತಿ ಪ್ರಕಾರ, ಪರಿಚಿತ ಸ್ಥಳಗಳಲ್ಲಿ ಹುಡುಕಾಟ ನಡೆಸಿದರೂ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಬರ್ಕ್ಲಿ ಪೊಲೀಸ್ ಇಲಾಖೆಯಲ್ಲಿ ಕಾಣೆಯಾದ ಪ್ರಕರಣವಾಗಿ ದೂರು ದಾಖಲಿಸಲಾಗಿತ್ತು.
ಸಾಕೇತ್ ಅವರ ಕುಟುಂಬವು ಕರ್ನಾಟಕ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದು ತಕ್ಷಣದ ಕ್ರಮಕ್ಕೆ ಮನವಿ ಮಾಡಿತ್ತು. ತಮ್ಮ ಮಗ ಕಾಣೆಯಾಗಿರುವುದರಿಂದ ತೀವ್ರ ಆತಂಕ ಮತ್ತು ದುಃಖ ಉಂಟಾಗಿದೆ ಎಂದು ಕುಟುಂಬ ತಿಳಿಸಿತ್ತು. ಇದಕ್ಕೂ ಮುನ್ನ ಕಾನ್ಸುಲೇಟ್ ಅವರು ಕಾಣೆಯಾಗಿರುವ ಬಗ್ಗೆ ಪ್ರಕಟಣೆ ಹೊರಡಿಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

