ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ 12ನೇ ತರಗತಿವರೆಗಿನ (ಪಿಯುಸಿ) ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಅಧಿಕೃತ ರಜೆ ಘೋಷಿಸಿದೆ. ಆದರೆ, ಸರ್ಕಾರದ ಈ ಆದೇಶವನ್ನು ಮೀರಿ ತರಗತಿ ನಡೆಸಲು ಮುಂದಾದ ಕೆಲವು ಖಾಸಗಿ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ದರ್ಶನ್ ಅವರು ಕಾನೂನು ಚಾಟಿ ಬೀಸಿದ್ದಾರೆ.
ಜಿಲ್ಲಾಡಳಿತವು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಜೆ ಪ್ರಕಟಿಸಿದ್ದರೂ, ಕೆಲವು ಖಾಸಗಿ ಶಾಲೆ, ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳು ಪೋಷಕರು ಮತ್ತು ಮಕ್ಕಳಿಗೆ ಗೊಂದಲ ಮೂಡಿಸುವ ಸಂದೇಶಗಳನ್ನು ರವಾನಿಸಿದ್ದವು. “ನಮ್ಮ ಕಾಲೇಜು ಎಂದಿನಂತೆ ಇಂದು ಕಾರ್ಯನಿರ್ವಹಿಸಲಿದ್ದು, ನಿಗದಿತ ಎಲ್ಲಾ ತರಗತಿಗಳು ನಡೆಯಲಿವೆ” ಎಂದು ಮೊಬೈಲ್ನಲ್ಲಿ ಮೆಸೇಜ್ ಕಳುಹಿಸಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ.

ಇದನ್ನೂ ಓದಿ: ಕರಾವಳಿಯಲ್ಲಿ ವರುಣನ ಆರ್ಭಟ; ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮದ ಎಚ್ಚರಿಕೆ:
ಖಾಸಗಿ ಸಂಸ್ಥೆಗಳ ಈ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು ತುರ್ತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. “ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿ ನಡೆಸಿರುವುದು ಕಂಡುಬಂದಲ್ಲಿ, ಅಂತಹ ಸಂಸ್ಥೆಗಳ ವಿರುದ್ಧ ‘ವಿಪತ್ತು ನಿರ್ವಹಣಾ ಕಾಯ್ದೆ 2005’ (Disaster Management Act 2005) ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗೆ ಕಡಕ್ ಎಚ್ಚರಿಕೆ ನೀಡಿದ್ದಾರೆ.ಭಾರೀ ಮಳೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಯಾವುದೇ ಕಾರಣಕ್ಕೂ ಆಟವಾಡಬಾರದು ಮತ್ತು ಜಿಲ್ಲಾಡಳಿತದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಸೂಚಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

