ವಿಜಯಪುರ: ನಗರದ ಸಿಂದಗಿ ಬೈಪಾಸ್ ಬಳಿ ಫೆಬ್ರವರಿ 27, 2026ರ ಶುಕ್ರವಾರದಂದು ಆಯೋಜಿಸಲಾಗಿದ್ದ ಜೆಡಿಎಸ್ನ ಬೆಳ್ಳಿ ಹಬ್ಬ ಹಾಗೂ ಕಿತ್ತೂರು ಕರ್ನಾಟಕ ಬೃಹತ್ ಜನತಾ ಸಮಾವೇಶದಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. “ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ತಿಂಗಳಿಗೆ 2,000 ರೂ. ನೀಡಿ ಕೈತೊಳೆದುಕೊಳ್ಳುತ್ತಿದೆ. ಒಂದು ವೇಳೆ ನಮ್ಮ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದರೆ ಮಹಿಳೆಯರಿಗೆ ಪ್ರತಿ ತಿಂಗಳು 5,000 ರೂಪಾಯಿಗಳನ್ನು ನೀಡುತ್ತಿದ್ದೆವು” ಎಂದು ಘೋಷಿಸಿದರು.
ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಹೆಸರಲ್ಲಿ 2,000 ರೂ. ನೀಡುತ್ತಿದೆ, ಆದರೆ ಮದ್ಯದ ಬೆಲೆ ಏರಿಕೆ, ಆಸ್ತಿ ನೋಂದಣಿ ದರ ಏರಿಕೆ ಮತ್ತು ವಿದ್ಯುತ್ ಬಿಲ್ ಏರಿಕೆಯ ಮೂಲಕ ಜನರ ಜೇಬಿನಿಂದ ಅದಕ್ಕಿಂತ ಹೆಚ್ಚಿನ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಬೇರೆ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸುಪ್ರೀಂ ರಿಲೀಫ್: ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ
ಕಾಂಗ್ರೆಸ್ ಸರ್ಕಾರವು ಈಗಾಗಲೇ 7.65 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಮುಂದಿನ ಬಜೆಟ್ನಲ್ಲಿ ಮತ್ತೆ 1 ಲಕ್ಷ ಕೋಟಿ ರೂ. ಸಾಲ ಮಾಡಲು ಹೊರಟಿದೆ. ಈ ಸಾಲವನ್ನು ತೀರಿಸುವವರು ಯಾರು? ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕ ಭಾಗವನ್ನು ಕಾಂಗ್ರೆಸ್ ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇಲ್ಲಿನ ಕೃಷ್ಣಾ ಮೇಲ್ದಂಡೆ ಯೋಜನೆ (UKP) 3ನೇ ಹಂತಕ್ಕೆ ಅನುದಾನ ನೀಡುತ್ತಿಲ್ಲ. ಕೇವಲ ‘ಕಿತ್ತೂರು ಕರ್ನಾಟಕ’ ಎಂದು ಹೆಸರು ಬದಲಾಯಿಸಿದರೆ ಅಭಿವೃದ್ಧಿಯಾದಂತೆ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

