ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಿಪರೀತ ವರ್ಷಧಾರೆಯಾಗುತ್ತಿದೆ. ಈ ನಡುವೆ ಹವಾಮಾನ ಇಲಾಖೆಯು (IMD) ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸುವ ಮೂಲಕ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಉತ್ತರ ಕನ್ನಡ, ಉಡುಪಿಗೆ ‘ರೆಡ್ ಅಲರ್ಟ್’ ಎಚ್ಚರಿಕೆ:

ಕರಾವಳಿ ಭಾಗದ ಪ್ರಮುಖ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯ ತೀವ್ರತೆ ವಿಪರೀತವಾಗಿರಲಿದ್ದು, ನಾಳೆ (ಜುಲೈ 7) ಈ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ (Red Alert) ಘೋಷಿಸಿದೆ. ಇದರೊಂದಿಗೆ ಉತ್ತರ ಕನ್ನಡ, ಉಡುಪಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆಗಳಲ್ಲಿ ವಿಪರೀತ ಮಳೆಯ ಜೊತೆಗೆ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’:
ರಾಜ್ಯದ ಒಟ್ಟು 18 ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಮಳೆಯಬ್ಬರ ಜೋರಾಗಿರಲಿದ್ದು, ಇಲಾಖೆಯು ‘ಆರೆಂಜ್ ಅಲರ್ಟ್’ (Orange Alert) ಪ್ರಕಟಿಸಿದೆ. ಮಳೆಯ ನಿರೀಕ್ಷೆ ಇರುವ ಜಿಲ್ಲೆಗಳ ಪಟ್ಟಿ ಹೀಗಿದೆ:
ಉತ್ತರ ಒಳನಾಡು: ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು.
ದಕ್ಷಿಣ ಒಳನಾಡು ಹಾಗೂ ಮಲೆನಾಡು: ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ.
ಇದನ್ನೂ ಓದಿ:Chikkamagalur : ಮದುವೆಗೂ ಮುನ್ನ ತಾಯಿಯಾದ ಮೊಮ್ಮಗಳು: ಶಿಶುವಿನ ಕತ್ತು ಹಿಸುಕಿದ ಅಜ್ಜಿ!
ಮುಂದಿನ ದಿನಗಳ ಹವಾಮಾನ ಮುನ್ಸೂಚನೆ:
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜುಲೈ 9 ರಿಂದ 11 ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇನ್ನು ಜುಲೈ 9 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8 ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ನದಿ ತೀರದ ನಿವಾಸಿಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತಗಳು ಸೂಚಿಸಿವೆ. ಇನ್ನು ನಾಳೆ ಮಂಗಳೂರಿನಲ್ಲಿ ಶಾಲೆಗೆ ರಜೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಒಂದು ವೇಳೆ ಮಳೆ ಹೆಚ್ಚಾದರೆ ರಜೆ ನೀಡುವ ಸಾಧ್ಯತೆ ಇದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

