ಬೆಂಗಳೂರು: ಯುಗಾದಿ ಹಾಗೂ ರಮಝಾನ್ ಹಬ್ಬಗಳ ಹಿನ್ನೆಲೆ ರಾಜ್ಯದಲ್ಲಿ ಪ್ರಯಾಣಿಕರ ಸಂಚಾರ ಹೆಚ್ಚಾಗುವ ನಿರೀಕ್ಷೆಯಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) 2,000 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ಸೂಚಿಸಿದೆ.
ಹಬ್ಬದ ಸಂದರ್ಭದಲ್ಲಿನ ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಸಮರ್ಥವಾಗಿ ನಿರ್ವಹಿಸಲು ಮತ್ತು ಪ್ರಯಾಣಿಕರಿಗೆ ಸುಗಮ ಸಂಚಾರ ಒದಗಿಸಲು ಈ ವಿಶೇಷ ಬಸ್ ಸೇವೆಗಳನ್ನು ಆರಂಭಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 18ರಿಂದ 20ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಈ ವಿಶೇಷ ಬಸ್ಗಳು ಸಂಚರಿಸಲಿದ್ದು, ಮರಳಿ ಬೆಂಗಳೂರಿಗೆ ಬರುವ ಸೇವೆಗಳು ಮಾರ್ಚ್ 22ರಂದು ವ್ಯವಸ್ಥೆ ಮಾಡಲಾಗಿದೆ.
ಈ ಬಸ್ಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಹೊರಡಲಿದ್ದು, ರಾಜ್ಯದ ವಿವಿಧ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದಲೂ ಸೇವೆಗಳು ಲಭ್ಯವಿರುತ್ತವೆ. ಪ್ರಯಾಣಿಕರ ಬೇಡಿಕೆಯನ್ನು ಆಧರಿಸಿ ಹೆಚ್ಚುವರಿ ಟ್ರಿಪ್ಗಳನ್ನೂ ವ್ಯವಸ್ಥೆ ಮಾಡಲಾಗುತ್ತದೆ.
ಇದನ್ನೂ ಓದಿ: ಎಂ.ಫಾರ್ಮ್ ಪರೀಕ್ಷೆಯಲ್ಲಿ ಪುತ್ತೂರಿನ ಸ್ವಸ್ತಿಕಾರಿಗೆ ಪ್ರಥಮ ರ್ಯಾಂಕ್
ಪ್ರಯಾಣಿಕರು ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ www.ksrtc.karnataka.gov.in
ಮೂಲಕ ಆನ್ಲೈನ್ನಲ್ಲಿ ಇ-ಟಿಕೆಟ್ ಬುಕ್ ಮಾಡಬಹುದಾಗಿದೆ. ಜೊತೆಗೆ ರಾಜ್ಯದ ವಿವಿಧ ಡಿಪೋಗಳಲ್ಲಿ ಇರುವ ಕಂಪ್ಯೂಟರೈಸ್ಡ್ ಬುಕ್ಕಿಂಗ್ ಕೌಂಟರ್ಗಳ ಮೂಲಕವೂ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.
ಹಬ್ಬದ ಪ್ರಯಾಣಕ್ಕೆ ವಿಶೇಷ ರಿಯಾಯಿತಿಯನ್ನೂ ಕೆಎಸ್ಆರ್ಟಿಸಿ ಘೋಷಿಸಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಟ್ಟಾಗಿ ಮುಂಗಡ ಬುಕ್ಕಿಂಗ್ ಮಾಡಿದರೆ 5 ಶೇಕಡಾ ರಿಯಾಯಿತಿ ನೀಡಲಾಗುತ್ತದೆ. ಅಲ್ಲದೆ ಹೋಗುವ ಮತ್ತು ಬರುವ ಟಿಕೆಟ್ಗಳನ್ನು ಒಟ್ಟಿಗೆ ಬುಕ್ ಮಾಡಿದರೆ ವಾಪಸ್ಸಿನ ಪ್ರಯಾಣದ ಟಿಕೆಟ್ಗೆ 10 ಶೇಕಡಾ ರಿಯಾಯಿತಿ ದೊರೆಯಲಿದೆ.
ಈ ವಿಶೇಷ ಬಸ್ಗಳು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಸಿರ್ಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ ಸಂಚರಿಸಲಿದೆ.
ಇದಲ್ಲದೆ ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ಅಂತರರಾಜ್ಯ ಮಾರ್ಗಗಳಿಗೂ ವಿಶೇಷ ಬಸ್ ಸೇವೆಗಳನ್ನು ಒದಗಿಸಲಾಗುತ್ತದೆ.
ಹಬ್ಬದ ಕಾಲದಲ್ಲಿ ಸುರಕ್ಷಿತ, ಸುಲಭ ಹಾಗೂ ಕಡಿಮೆ ವೆಚ್ಚದ ಪ್ರಯಾಣವನ್ನು ಒದಗಿಸುವ ಜೊತೆಗೆ ಪ್ರಮುಖ ಮಾರ್ಗಗಳಲ್ಲಿ ಉಂಟಾಗುವ ವಾಹನ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

