ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮತ್ತು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಅಕ್ರಮ ಶಸ್ತ್ರಾಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) 3ನೇ ಮತ್ತು ಅಂತಿಮ ನೋಟಿಸ್ ಜಾರಿ ಮಾಡಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಬೆಳ್ತಂಗಡಿಯ ಉಜಿರೆಯಲ್ಲಿರುವ ತಿಮರೋಡಿ ಅವರ ನಿವಾಸದ ಮೇಲೆ ಎಸ್ಐಟಿ ದಾಳಿ ನಡೆಸಿದಾಗ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಈ ಹಿಂದೆ ಎರಡು ಬಾರಿ ನೋಟಿಸ್ ನೀಡಿದ್ದರೂ ತಿಮರೋಡಿ ಅವರು ಹಾಜರಾಗಿರಲಿಲ್ಲ. ಅವರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಈಗ ಪೊಲೀಸರು ಅವರ ಮನೆಗೆ 3ನೇ ಬಾರಿಗೆ ನೋಟಿಸ್ ಅಂಟಿಸಿದ್ದು, ವಿಚಾರಣೆಗೆ ಹಾಜರಾಗಲು ಅಂತಿಮ ಗಡುವು ನೀಡಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರು ತಪ್ಪಿಸಿಕೊಂಡರೆ ಪೊಲೀಸರು ಅವರನ್ನು ಬಂಧಿಸುವ (Arrest) ಸಾಧ್ಯತೆಯಿದೆ.

ಇದನ್ನೂ ಓದಿ: ಯುಗಾದಿ–ರಮಝಾನ್ ಪ್ರಯುಕ್ತ 2 ಸಾವಿರ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್: ಪ್ರಯಾಣಿಕರಿಗೆ ಡಿಸ್ಕೌಂಟ್ ಆಫರ್
ಇದೇ ವೇಳೆ, ಪುತ್ತೂರು ಉಪ ವಿಭಾಗಾಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಬಂಧನ ಭೀತಿಯಲ್ಲಿರುವ ತಿಮರೋಡಿ ಅವರು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು (Anticipatory Bail) ಕೋರಿ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

