ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಬೃಹತ್ ಕೊಡುಗೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಬರುವ ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಸಲು ತೀರ್ಮಾನಿಸಿದೆ. ಈ ಮಹತ್ವದ ಸಭೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಕರಾವಳಿ ಭಾಗದ ಶಾಸಕರು ಹಾಗೂ ಸಂಸದರೊಂದಿಗೆ ಉನ್ನತ ಮಟ್ಟದ ಪೂರ್ವಭಾವಿ ಆಲೋಚನಾ ಸಭೆ ನಡೆಸಿದ್ದಾರೆ. ಬೆಂಗಳೂರಿನ ಸಿಎಂ ಅಧಿಕೃತ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಈ ಸಭೆ ಜರುಗಿತು.
ಮಂಗಳೂರಿನಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಮೂಲಸೌಕರ್ಯ, ಪ್ರವಾಸೋದ್ಯಮ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಐತಿಹಾಸಿಕ ಘೋಷಣೆಗಳು ಹೊರಬೀಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಯಾವುದೇ ರಾಜಕೀಯ ಭೇದಭಾವವಿಲ್ಲದೆ ಪಕ್ಷಾತೀತವಾಗಿ ಕರಾವಳಿ ಭಾಗದ ಎಲ್ಲಾ ಜನಪ್ರತಿನಿಧಿಗಳ ಅನಿಸಿಕೆ ಮತ್ತು ಸಲಹೆಗಳನ್ನು ಪಡೆದರು.
ಸಭೆಯಲ್ಲಿ ಭಾಗವಹಿಸಿದ ಪ್ರಮುಖರು:
ವಿಧಾನಸಭಾ ಅಧ್ಯಕ್ಷರಾದ ಯು.ಟಿ. ಖಾದರ್
ದಕ್ಷಿಣ ಕನ್ನಡ ಸಂಸದ ಕ್ಯಾಪ್ಚನ್ ಬ್ರಿಜೇಶ್ ಚೌಟ (ಬಿಜೆಪಿ)
ರಾಜ್ಯಸಭಾ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (ಕಾಂಗ್ರೆಸ್)
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (ಬಿಜೆಪಿ)
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದ ದೀರ್ಘಕಾಲದ ಬೇಡಿಕೆಗಳು, ಬಂದರು ಅಭಿವೃದ್ಧಿ, ಕಡಲ್ಕೊರೆತ ತಡೆ, ಪ್ರವಾಸೋದ್ಯಮ ಉತ್ತೇಜನ ಮತ್ತು ಕೈಗಾರಿಕಾ ಪ್ರಗತಿಗೆ ಸಂಬಂಧಿಸಿದಂತೆ ಶಾಸಕರು ನೀಡಿದ ಅಭಿವೃದ್ಧಿ ನಕ್ಷೆಯನ್ನು (Blueprint) ಸಿಎಂ ಆಲಿಸಿದರು. ವಿರೋಧ ಪಕ್ಷದ (ಬಿಜೆಪಿ) ಸಂಸದರು ಮತ್ತು ಶಾಸಕರ ಸಲಹೆಗಳನ್ನು ಸಹ ಮುಕ್ತವಾಗಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಸೆಪ್ಟೆಂಬರ್ 18 ರ ಮಂಗಳೂರು ಕ್ಯಾಬಿನೆಟ್ ಸಭೆಯಲ್ಲಿ ಈ ಭಾಗಕ್ಕೆ ವಿಶೇಷ ಯೋಜನಾ ಪ್ಯಾಕೇಜ್ ಪ್ರಕಟಿಸುವ ಭರವಸೆ ನೀಡಿದ್ದಾರೆ.

