ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ (CCB) ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರು ಕಿಲಾಡಿ ಡ್ರಗ್ ಪೆಡ್ಲರ್ಗಳನ್ನು ಪ್ರತ್ಯೇಕ ದಾಳಿ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರಿನ ಹೊಯ್ಗೆ ಬಜಾರ್ ನಿವಾಸಿ ಪ್ರಣಾಮ್ ಹಾಗೂ ಅರ್ಕುಳ ನಿವಾಸಿ ಧನರಾಜ್ ಎಂದು ಗುರುತಿಸಲಾಗಿದೆ. ಇವರು ನಗರದಾದ್ಯಂತ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಜಾಲದ ಪ್ರಮುಖ ಕೊಂಡಿಗಳಾಗಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ, ಆರೋಪಿಗಳಿಂದ ಒಟ್ಟು 16 ಲಕ್ಷದ 40 ಸಾವಿರ ರೂಪಾಯಿ ಮೌಲ್ಯದ 164 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಮಾದಕ ವಸ್ತು ಸಾಗಾಟಕ್ಕೆ ಬಳಸುತ್ತಿದ್ದ ಮೊಬೈಲ್ ಫೋನ್ಗಳು ಸೇರಿದಂತೆ ಇನ್ನುಳಿದ ಸಾಮಗ್ರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ: ಇನ್ಸ್ಟಾಗ್ರಾಮ್ನಲ್ಲಿ ಸಿಕ್ಕಿಬಿದ್ದ ಪಾಕಿಸ್ತಾನಿ ಉಗ್ರನ ಜಾಲ!: ತುಮಕೂರು, ದಾವಣಗೆರೆ ಯುವಕರನ್ನು ಬಲಿಪಶು ಮಾಡಿದ ‘ರಾಣಾ’!
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತ ಆರೋಪಿಗಳು ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕಡಿಮೆ ಬೆಲೆಗೆ ಎಂಡಿಎಂಎ (MDMA) ಮಾದಕ ವಸ್ತುವನ್ನು ಖರೀದಿಸುತ್ತಿದ್ದರು. ಬಳಿಕ ಅದನ್ನು ಮಂಗಳೂರಿಗೆ ತಂದು ಇಲ್ಲಿನ ಪ್ರಮುಖ ಕಾಲೇಜು ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದುಬಾರಿ ಬೆಲೆಗೆ ಮಾರಾಟ ಮಾಡಿ ದಂಧೆ ನಡೆಸುತ್ತಿದ್ದರು. ಈ ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಗಂಭೀರ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


