ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬರಿಮಾರು ಬಳಿ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಬುಡಸಮೇತ ಬಿದ್ದು, 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಇನ್ನು ಈ ಘಟನೆ ಸಂಜೆ 4-5 ಗಂಟೆಗೆ ನಡೆದಿದೆ.
ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್ ಮೇಲೆ ಮರ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ ಬಾಲಕಿಯೊಬ್ಬಳಿಗೆ ತೀವ್ರ ಗಂಭೀರ ಗಾಯಗಳಾಗಿದ್ದವು. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು ಬಿಳಿಯೂರು ಗ್ರಾಮದ ಚಂದ್ರಹಾಸ ಮತ್ತು ಅನಿತಾ ದಂಪತಿಯ ಪುತ್ರಿ ಚಿರಣ್ವಿ (5 ವರ್ಷ) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇತರ ಮಕ್ಕಳನ್ನು ಸ್ಥಳೀಯರ ಸಮಯಪ್ರಜ್ಞೆ ಹಾಗೂ ನೆರವಿನಿಂದ ತಕ್ಷಣವೇ ಪುತ್ತೂರು ಹಾಗೂ ತುಂಬೆಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಎನ್ಎಸ್ಜಿ ಕಮಾಂಡೋಗಳ ಹೈ-ಅಲರ್ಟ್: ಸಾರ್ವಜನಿಕರಿಗೆ ಜಿಲ್ಲಾಡಳಿತದ ಸೂಚನೆ
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

