ಬೆಂಗಳೂರು: ಸಿಲಿಕಾನ್ ಸಿಟಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಮತ್ತೊಂದು ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಜೈಲಿನಲ್ಲಿರುವ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋದಲ್ಲಿ “ನಮಗೆ ಡಿಜಿಪಿ ಅಲೋಕ್ ಕುಮಾರ್ ಅವರೇ ಮೊಬೈಲ್ ಕೊಟ್ಟಿದ್ದಾರೆ” ಎಂದು ಹೇಳುವ ಮೂಲಕ ಅಧಿಕಾರಿಗಳ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದಾರೆ.
ವಿಡಿಯೋ ವೈರಲ್ ಆದ ತಕ್ಷಣ ಎಚ್ಚೆತ್ತ ಜೈಲು ಅಧಿಕಾರಿಗಳು ಮತ್ತು ಪೊಲೀಸರು 9ನೇ ಬ್ಯಾರಕ್ನಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಶೌಚಾಲಯದ ಡ್ರೈನೇಜ್ ಮಾರ್ಗದಲ್ಲಿ ಹಾಲಿನ ಪ್ಯಾಕೆಟ್ಗಳಲ್ಲಿ ಸುತ್ತಿ ಅಡಗಿಸಿಡಲಾಗಿದ್ದ ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಲಾಗಿದೆ. ದರ್ಶನ್, ಅಭಿಷೇಕ್ ಮತ್ತು ಎಂಡ್ರೋಸ್ ಎಂಬ ವಿಚಾರಣಾಧೀನ ಕೈದಿಗಳು ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

ಇಲ್ಲಿದೆ ನೋಡಿ ವಿಡಿಯೋ:
ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳಾದ ಇವರನ್ನು ಇತ್ತೀಚೆಗೆ ಬೇರೆ ಬ್ಯಾರಕ್ಗೆ ಸ್ಥಳಾಂತರ ಮಾಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಕೈದಿಗಳು, ಡಿಜಿಪಿ ಅಲೋಕ್ ಕುಮಾರ್ ಅವರ ಹೆಸರಿಗೆ ಚ್ಯುತಿ ತರಲು ಉದ್ದೇಶಪೂರ್ವಕವಾಗಿ ಈ ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ಕ್ವಾರಂಟೈನ್ ಸೆಲ್ಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಅಪಹರಿಸಿ ಬಾಲಕಿಯ ಬರ್ಬರ ಹತ್ಯೆ, ಕಲ್ಲಿನಿಂದ ಮುಖ ಜಜ್ಜಿದ ಹಂತಕರು!
ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ವಾರ್ಡರ್ಗಳಾದ ಶಿವಾನಂದ ಕರ್ಲಬಟ್ಟಿ, ನಿರಂಜನ ಎ. ಕಾಮತ್ ಮತ್ತು ಹನುಮಂತಪ್ಪ ಹಡಪದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಲ್ಲದೆ, ಸಂಬಂಧಪಟ್ಟ ಜೈಲರ್ ವಿರುದ್ಧವೂ ಶಿಸ್ತು ಕ್ರಮಕ್ಕೆ ಸೂಚನೆ ನೀಡಲಾಗಿದೆ. ಜೈಲಿನೊಳಗೆ ಏರ್ಟೆಲ್ ಸಿಗ್ನಲ್ ಲಭ್ಯವಾಗುತ್ತಿರುವುದು ಭದ್ರತೆಗೆ ದೊಡ್ಡ ಸವಾಲಾಗಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

