ನವದೆಹಲಿ: ಭಾರತೀಯ ಸಂಸದೀಯ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ (ತಿದ್ದುಪಡಿ) ವಿಧೇಯಕ-2026 ಅನ್ನು ಮಂಡಿಸಲು ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ.
ಏಪ್ರಿಲ್ 16 ರಿಂದ 18 ರವರೆಗೆ ಈ ವಿಶೇಷ ಅಧಿವೇಶನ ನಡೆಯಲಿದ್ದು, ಪ್ರಮುಖವಾಗಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ (Delimitation) ಕುರಿತಾದ ವಿಧೇಯಕಗಳನ್ನು ಚರ್ಚೆಗೆ ಎತ್ತಿಕೊಳ್ಳಲಾಗುವುದು. ಈ ಐತಿಹಾಸಿಕ ವಿಧೇಯಕದ ಮಂಡನೆ ಮತ್ತು ಮತದಾನದ ವೇಳೆ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿ ತನ್ನ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸದಸ್ಯರಿಗೆ ತ್ರೀ-ಲೈನ್ ವಿಪ್ (Three-line Whip) ಜಾರಿ ಮಾಡಿದೆ. ಯಾವುದೇ ಸದಸ್ಯರಿಗೆ ರಜೆ ಮಂಜೂರು ಮಾಡಲಾಗುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಜಾಗತಿಕ ಉದ್ವಿಘ್ನತೆಯ ನಡುವೆ ವೇಗವಾಗಿ ಬೆಳೆಯುತ್ತಿರುವ ಭಾರತದ ಆರ್ಥಿಕತೆ!
2023ರ ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, 2029ರ ಸಾರ್ವತ್ರಿಕ ಚುನಾವಣೆಗಿಂತ ಮುಂಚಿತವಾಗಿಯೇ ಶೇ. 33ರಷ್ಟು ಮೀಸಲಾತಿಯನ್ನು ಜಾರಿಗೆ ತರುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ 2011ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಉದ್ದೇಶಿಸಲಾಗಿದೆ. ಹೊಸ ವಿಧೇಯಕದ ಪ್ರಕಾರ ಲೋಕಸಭೆಯ ಒಟ್ಟು ಸದಸ್ಯರ ಬಲವನ್ನು ಈಗಿರುವ 543 ರಿಂದ ಗರಿಷ್ಠ 850ಕ್ಕೆ ಏರಿಸುವ ಪ್ರಸ್ತಾವನೆಯೂ ಈ ಅಧಿವೇಶನದಲ್ಲಿ ಚರ್ಚೆಯಾಗಲಿದೆ.

ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

