ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದ್ದು, ಮಾರತ್ ಹಳ್ಳಿ ಪೊಲೀಸರು ತಡವಾದರೂ ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಸುಮಾರು ಬಂಗಾರ ದೋಚುತ್ತಿದ್ದ ಆರೋಪಿಗಳು ನೇಪಾಳಿ ದಂಪತಿ ಎಂಬುದು ತನಿಖೆಯಿಂದ ದೃಢಪಟ್ಟಿದ್ದು, ಖದೀಮರನ್ನು ಹಿಡಿಯಲು ಬಲೆ ಬೀಸಿದ್ದಾರೆ.
ಚಿನ್ನಾಭರಣ ಕಳ್ಳತನದ ಜಾಡು ಹಿಡಿದು ಹೊರಟ ಪೊಲೀಸರಿಗೆ ಕದೀಮ ದಂಪತಿಯ ಕುರಿತ ಹಲವು ವಿಷಯಗಳು ತಿಳಿದು ಬಂದಿವೆ. ತನಿಖೆ ನಡೆಸಿದ ಪೊಲೀಸರು, ಆರೋಪಿಗಳು ದಿನೇಶ್ ಹಾಗೂ ಕಮಲ ಅಥವಾ ಸಲೀನಾ ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಮನೆಕೆಲಸಕ್ಕೆ ಸೇರಿ ಕಳ್ಳತನ ನಡೆಸುತ್ತಿದ್ದರೆಂದು ತಿಳಿಸಿದ್ದಾರೆ. ಈ ದಂಪತಿ ದೇಶದ ಅನೇಕ ಭಾಗಗಳಲ್ಲಿ ಇದೇ ರೀತಿಯ ಕೃತ್ಯಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಅಮೆರಿಕ-ಭಾರತ ಒಪ್ಪಂದ: ಏರುವುದೇ ಪೆಟ್ರೋಲ್, ಡೀಸೆಲ್ ಬೆಲೆ?
ಈ ಪ್ರಕರಣದ ಬೆನ್ನತ್ತಿರುವ ಮಾರತ್ ಹಳ್ಳಿ ಪೊಲೀಸರು ಸುಮಾರು ಏಳು ವಿಶೇಷ ತಂಡಗಳನ್ನು ರಚಿಸಿ ಮುಂಬೈ, ಕೊಲ್ಕತ್ತಾ ಹಾಗೂ ನೇಪಾಳ ಸೇರಿ ಹಲವು ಕಡೆಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿದ್ದರೆ ಅವರನ್ನು ಪತ್ತೆಹಚ್ಚುವುದು ಕಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಸ್ಥಳೀಯವಾಗಿ ಯಾರಾದರೂ ಆರೋಪಿಗಳಿಗೆ ಸಹಾಯ ಮಾಡಿದ್ದಾರೆಯೇ ಎಂಬುದರ ಕುರಿತಾದ ತನಿಖೆಯೂ ಮುಂದುವರಿದಿದೆ ಎಂದು ತಿಳಿಸಲಾಗಿದೆ.
ಈ ಹಿಂದೆಯೂ ಕಳ್ಳತನ ನಡೆಸಿದ್ದ ಜೋಡಿ
ಪುಣೆಯ ಭಾವ್ಹಾನ್ ಪ್ರದೇಶದ ವಿಂಡ್ಮಿಲ್ ಸೊಸೈಟಿಯ ರತ್ನಾದೀಪ್ ರಂಗನಾಥ್ ರಾವ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿ ಸುಮಾರು ಆರು ತಿಂಗಳ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಾಕರ್ ಒಡೆದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು.
2025ರ ಅಕ್ಟೋಬರ್ನಲ್ಲಿ ಮಹಾರಾಷ್ಟ್ರದಲ್ಲಿ ನಿವೃತ್ತ ಸರ್ಕಾರಿ ಅಧಿಕಾರಿಯ ಮನೆಯಲ್ಲಿ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರೆಂದು ಕಾರ್ಯಾಚರಣೆ ವೇಳೆ ತಿಳಿದುಬಂದಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

