ಪುತ್ತೂರು: ಪುತ್ತೂರಿನ ಸುಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಧ್ವಜಾರೋಹಣದ ವಿಚಾರದಲ್ಲಿ ಈಗ ವಿವಾದವೊಂದು ಭುಗಿಲೆದ್ದಿದೆ. ಯಾವುದೇ ಅಧಿಕೃತ ಅನುಮತಿ ಇಲ್ಲದ ವ್ಯಕ್ತಿಯೊಬ್ಬರು ಈ ಪವಿತ್ರ ಕಾರ್ಯದಲ್ಲಿ ಭಾಗಿಯಾಗುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಶೈವಕ್ಷೇತ್ರ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ಶ್ರೀನಾಥ್ ಟಿ.ಎಸ್. ಸುಬ್ರಹ್ಮಣ್ಯ ಅವರು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, “ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಾವುದೇ ಅನುಮತಿ ಇಲ್ಲದ, ಕ್ರಿಮಿನಲ್ ಆರೋಪಿಯ ತಂದೆ ಪಿ.ಜಿ. ಜಗನ್ನಿವಾಸ ರಾವ್ ಅವರು ಜಾತ್ರೆಯ ಧ್ವಜಾರೋಹಣ ಮಾಡಿದರೆ, ಅದು ದೇವಸ್ಥಾನದ ಪವಿತ್ರ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಂತ್ರಜ್ಞಾನ ಬಳಕೆಯ ನಡುವೆ ಚಿಂತನಾ ಶಕ್ತಿ ಕಾಪಾಡಿಕೊಳ್ಳಿ: ಅತುಲ್ ಭಟ್
ಪಿ.ಜಿ. ಜಗನ್ನಿವಾಸ ರಾವ್ ಅವರಿಗೆ ಧ್ವಜಾರೋಹಣ ಮಾಡಲು ಯಾವುದೇ ಕಾನೂನಾತ್ಮಕ ಅಥವಾ ಧಾರ್ಮಿಕ ಅನುಮತಿ ಇಲ್ಲ ಎಂದು ಆರೋಪಿಸಲಾಗಿದೆ. ದೇವಸ್ಥಾನದ ಸಂಪ್ರದಾಯಗಳಿಗೆ ಚ್ಯುತಿ ಬಾರದಂತೆ ದೇವಸ್ಥಾನದ ಆಡಳಿತ ಮಂಡಳಿ ಎಚ್ಚರಿಕೆ ವಹಿಸಬೇಕು ಎಂದು ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ.

ಧಾರ್ಮಿಕ ವಿಧಿವಿಧಾನಗಳಲ್ಲಿ ಅನರ್ಹ ವ್ಯಕ್ತಿಗಳು ಪಾಲ್ಗೊಳ್ಳುವುದು ದೇವಸ್ಥಾನದ ಘನತೆಗೆ ಧಕ್ಕೆ ತರುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಹೇಳಿಕೆಯು ಪುತ್ತೂರಿನ ಭಕ್ತ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದು, ಮುಂದಿನ ದಿನಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ


