ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಅಂಚೆ ಮತಗಳ ಮರುಎಣಿಕೆಗೆ ತಡೆ ನೀಡಿದೆ. ಈ ಮೂಲಕ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ದೊಡ್ಡ ಜಯ ಸಿಕ್ಕಂತಾಗಿದ್ದು, ಅವರು ಶಾಸಕರಾಗಿ ಮುಂದುವರಿಯಲಿದ್ದಾರೆ.
ಹಿಂದೆ ನಡೆದ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅಂಚೆ ಮತಗಳ ಮರುಎಣಿಕೆಗೆ ಆದೇಶಿಸಿತ್ತು. ಈ ಆದೇಶದಿಂದಾಗಿ ಜೀವರಾಜ್ ಅವರಿಗೆ ಗೆಲುವಿನ ನಿರೀಕ್ಷೆ ಮೂಡಿತ್ತು. ಆದರೆ, ರಾಜೇಗೌಡ ಅವರು ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ಶೃಂಗೇರಿ ಅಖಾಡದಲ್ಲಿ ಬಿಜೆಪಿಗೆ ಭರ್ಜರಿ ಜಯ: 52 ಮತಗಳ ಅಂತರದಿಂದ ಡಿ.ಎನ್. ಜೀವರಾಜ್ ವಿಜೇತ!
ಸುಪ್ರೀಂ ಕೋರ್ಟ್ ಆದೇಶದ ನಂತರ ನವದೆಹಲಿಯಲ್ಲಿ ಮಾತನಾಡಿದ ರಾಜೇಗೌಡ ಅವರು, “ನನಗೆ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಕ್ಕಿದೆ. ಅಂಚೆ ಮತಗಳ ಎಣಿಕೆಯಲ್ಲಿ ಗೊಂದಲವಿತ್ತು ಮತ್ತು ನನ್ನ ಮತಗಳನ್ನು ಕಡಿಮೆ ತೋರಿಸಲಾಗಿತ್ತು ಎಂಬ ಅನುಮಾನವಿತ್ತು. ಈಗ ಹೈಕೋರ್ಟ್ ಆದೇಶಕ್ಕೆ ತಡೆ ಸಿಕ್ಕಿರುವುದರಿಂದ ಸತ್ಯಕ್ಕೆ ಜಯ ಸಿಕ್ಕಂತಾಗಿದೆ,” ಎಂದು ಸಂತಸ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ (Status Quo) ಕಾಯ್ದುಕೊಳ್ಳಲು ಆದೇಶಿಸಿರುವುದರಿಂದ, ರಾಜೇಗೌಡ ಅವರೇ ಶೃಂಗೇರಿಯ ಶಾಸಕರಾಗಿ ಮುಂದುವರಿಯಲಿದ್ದಾರೆ. ಡಿ.ಎನ್. ಜೀವರಾಜ್ ಅವರಿಗೆ ಈ ಆದೇಶದಿಂದ ತಾತ್ಕಾಲಿಕ ಹಿನ್ನಡೆಯಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


