ಬೆಂಗಳೂರು: ಅನೇಕ ಕಡೆಗಳಲ್ಲಿ ಹೆಚ್ಚಿನ ರೈತರು ರಬ್ಬರ್ ಬೆಳೆಯನ್ನೇ ಅವಲಂಬಿಸಿದ್ದಾರೆ. ಹೀಗಾಗಿ ಬೆಲೆ ಕುಸಿತದಿಂದ ನಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಪ್ರಸ್ತುತ ರಬ್ಬರ್ ಬೆಳೆ ಬೆಳೆಯಲೂ ಸಾಧ್ಯವಾಗದ ಪರಿಸ್ಥಿತಿಯಲ್ಲಿ ರೈತರಿದ್ದಾರೆ. ಹೀಗಾಗಿ ಕೇರಳ ರಾಜ್ಯದ ಮಾದರಿಯಂತೆ ಕರ್ನಾಟಕ ಸರ್ಕಾರವೂ ರಬ್ಬರ್ ಬೆಳೆಗೆ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದರು.

ಸದ್ಯ ರಬ್ಬರ್ ಬೆಲೆ ಕುಸಿದಿರುವುದರಿಂದ ರೈತರು ರಬ್ಬರ್ ತೆಗೆಯುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಇದರ ಸಮಸ್ಯೆಯಿಂದಾಗಿ ರೈತರು ರೀ ಪ್ಲಾಂಟೇಶನ್ ಮಾಡಲು ಮುಂದಾಗುತ್ತಿಲ್ಲ. ಹೀಗಾಗಿ ರೀ ಪ್ಲಾಂಟೇಶನ್ಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದ ಅವರು, ರಬ್ಬರ್ ಬೆಳೆಯನ್ನು ಕೃಷಿಯೆಂದು ಪರಿಗಣಿಸಿ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಯಾಗುತ್ತಾ? ಸುಳ್ಯ ಶಾಸಕಿ ಪ್ರಶ್ನೆಗೆ ಸಚಿವರ ಉತ್ತರ
ಇದಕ್ಕೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ರಬ್ಬರ್ ಬೆಳೆ ನಮ್ಮ ಇಲಾಖೆ ವ್ಯಾಪ್ತಿಗೆ ಒಳಪಡುವುದಿಲ್ಲ. ರಬ್ಬರ್ ನಂತಹ ಬೆಳೆಗಳಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ನಿಗದಿಯಾಗುತ್ತದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ರಬ್ಬರ್ ಬೋರ್ಡ್ ಇದೆ. ಕೇಂದ್ರದಲ್ಲಿ ನಿಮ್ಮದೇ ಸರ್ಕಾರ ಇದೆ. ನೀವು ಕೇಂದ್ರದ ಗಮನ ಸೆಳೆಯಲು ಪ್ರಯತ್ನಿಸಿ. ನಾವು ಕೂಡ ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಆದಷ್ಟು ಬೇಗ ಅದನ್ನು ನಮ್ಮ ಇಲಾಖೆಗೆ ಸೇರಿಸಿದರೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದರು.
ಅಡಿಕೆ ರೋಗದ ಬಗ್ಗೆಯೂ ಪ್ರಸ್ತಾಪ
ಈಗಾಗಲೇ ಕರಾವಳಿ ಭಾಗದ ಪ್ರಮುಖ ಬೆಳೆ ಅಡಿಕೆಗೆ ಹಳದಿ ರೋಗ, ಎಲೆ ಚುಕ್ಕಿ ರೋಗಗಳಿಂದ ಕೃಷಿ ನಾಶವಾಗಿದೆ ಎಂದು ಭಾಗೀರಥಿ ಮುರುಳ್ಯ ಅವರು ಸದನದಲ್ಲಿ ಪ್ರಸ್ತಾಪಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com)

