ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಗುರುದತ್ತ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಸುಳ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ, 24×7 ನಿರಂತರ ವೈದ್ಯಕೀಯ ಸೇವೆ ಕಲ್ಪಿಸುವಂತೆ ಶಾಸಕರು ತಿಂಗಳ ಹಿಂದೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ಸಚಿವರು, ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದರು. ಅದರಂತೆ ಇಂದು ಆಯುಕ್ತರನ್ನು ನೇರವಾಗಿ ಭೇಟಿಯಾಗಿ ವಿಷಯವನ್ನು ಗಂಭೀರವಾಗಿ ಪರಿಶೀಲಿಸುವಂತೆ ಶಾಸಕರು ಚರ್ಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ, ದಿನದ 24 ಗಂಟೆಯೂ ಸಾರ್ವಜನಿಕರಿಗೆ ಸೇವೆ ಲಭ್ಯವಾಗುವಂತೆ ಕ್ರಮ ವಹಿಸುವುದು.ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ನೂತನ ‘ರಕ್ತನಿಧಿ ಕೇಂದ್ರ’ (Blood Bank) ಸ್ಥಾಪಿಸುವುದು.
ಇದನ್ನೂ ಓದಿ: ಧರ್ಮಸ್ಥಳದಲ್ಲಿ ‘ರಾಕಿಂಗ್ ಸ್ಟಾರ್’ ಯಶ್: ಮಂಜುನಾಥ ಸ್ವಾಮಿಯ ದರ್ಶನ ಪಡೆದು ‘ಟಾಕ್ಸಿಕ್’ ಯಶಸ್ಸಿಗೆ ವಿಶೇಷ ಪೂಜೆ
ಕಡಬ ಆಸ್ಪತ್ರೆಯಲ್ಲಿ ಕಿಡ್ನಿ ರೋಗಿಗಳ ಅನುಕೂಲಕ್ಕಾಗಿ ಡಯಾಲಿಸಿಸ್ (Dialysis) ಯಂತ್ರ ಸ್ಥಾಪಿಸಲು ನೂತನ ಕಟ್ಟಡ ನಿರ್ಮಿಸುವುದು.ಈ ಎಲ್ಲಾ ನ್ಯಾಯಯುತ ಬೇಡಿಕೆಗಳ ಕುರಿತು ಶೀಘ್ರವೇ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಇಲಾಖೆ ಆಯುಕ್ತರು ಭರವಸೆ ನೀಡಿದ್ದಾರೆ.

