ಮಂಗಳೂರು: ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಬಜಿಲ ಕೆರಿಯ ಟಿಟಿ ರಸ್ತೆಯಲ್ಲಿ ನೆರೆಹೊರೆಯ ಎರಡು ಕುಟುಂಬಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಭೀಕರ ಸಂಘರ್ಷ ಸಂಭವಿಸಿದೆ. ತಲವಾರು, ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಪರಸ್ಪರ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ನಗರದ ಬಜಿಲ ಕೆರಿಯ ಪ್ರದೇಶದಲ್ಲಿ ನೆರೆಮನೆಯವರ ನಡುವೆ ಸಣ್ಣ ವಿಷಯಕ್ಕೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ. ಕುಟುಂಬ ಸದಸ್ಯರು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಕೊಲೆ ಬೆದರಿಕೆ ಒಡ್ಡಿದ್ದಾರೆ. ಈ ವೇಳೆ ತಲವಾರ್ ಮತ್ತು ರಾಡ್ಗಳಂತಹ ಮಾರಕಾಸ್ತ್ರಗಳನ್ನು ಹಿಡಿದು ಬೀದಿಗಿಳಿದು ಹೊಡೆದಾಡಿಕೊಂಡಿದ್ದಾರೆ. ಈ ಆಘಾತಕಾರಿ ಹಲ್ಲೆಯ ದೃಶ್ಯಗಳು ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿವೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ
ಈ ಗಲಾಟೆಗೆ ಸಂಬಂಧಿಸಿದಂತೆ ಬಂದರು ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಮಹೇಶ್ ಶೆಟ್ಟಿ, ಪ್ರೀತಂ ಶೆಟ್ಟಿ, ಮನೀಶ್ ಶೆಟ್ಟಿ ಮತ್ತು ಜಿತೇಶ್ ಎಂಬುವರ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಸುನಿತಾ ಶೆಟ್ಟಿ ಅವರು ತೇಜಸ್, ಲೋಕೇಶ್ ಮತ್ತು ಅನಿತಾ ವಿರುದ್ಧ ದೂರು ದಾಖಲಿಸಿದ್ದಾರೆ.ಬಂದರು ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 115(2), 118(1), ಹಾಗೂ 351(3) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಗಾಯಗೊಂಡ ಮೂವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

