ಪುತ್ತೂರು: ಪುತ್ತೂರಿನಲ್ಲಿ ದರ್ಬೆ ಡಿಜಿಟಲ್ ಸೇವಾ ಕೇಂದ್ರವೊಂದರಲ್ಲಿ ಆ.21ರಂದು ಕೇಂದ್ರದ ಸಿಬ್ಬಂದಿ ಹಾಗೂ ಗ್ರಾಹಕಿಯ ನಡುವೆ ಮಾತಿನ ಚಕಮಕಿ ನಡೆದು, ಎರಡೂ ಕಡೆಯವರ ಬೆಂಬಲಿಗರು ಗುಂಪುಗೂಡಿ ಹೋಯ್ ಹೋಯ್ ನಡೆದಿತ್ತು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಇದೀಗ ಇದೇ ವೇಳೆ ಹಿಂದೂ ಮಹಿಳೆಯ ಮೇಲೆಯೂ ಹಲ್ಲೇ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಜಗಳ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದು, ಹಿಂದೂ ಮಹಿಳೆ ಮೇಲೆ ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹ ಮಾಡಿದ್ದಾರೆ, ಈ ಬಗ್ಗೆ ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎಕ್ಸ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಹಗಲಿನಲ್ಲಿಯೇ ಮಹಿಳೆಯ ಮೇಲೆ ದಾಳಿ ನಡೆಸಿ, ರಕ್ಷಣೆಗೆ ಬಂದ ಪೊಲೀಸ್ ಸಿಬ್ಬಂದಿಯ ಕಣ್ಣೆದುರೇ ಪೊಲೀಸ್ ಜೀಪ್ಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ತಮ್ಮ ಮೇಲೆ ಯಾವುದೇ ಕ್ರಮ ಜರುಗುವುದಿಲ್ಲ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸರ್ಕಾರ ಬೆನ್ನಿಗೆ ನಿಲ್ಲುತ್ತಾರೆ ಎಂಬ ಅತಿಯಾದ ಧೈರ್ಯವೇ ಈ ರೀತಿಯ ಕೃತ್ಯಕ್ಕೆ ಕಾರಣ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಇಲ್ಲಿದೆ ನೋಡಿ ಎಕ್ಸ್ ಪೋಸ್ಟ್:
ಪುತ್ತೂರು ನಗರದಲ್ಲಿ ಹಾಡುಹಗಲೇ ಹೆಣ್ಣುಮಗಳೊಬ್ಬಳ ಮೇಲೆ ಹಲ್ಲೆ ನಡೆಸಿ, ರಕ್ಷಣೆಗೆ ಬಂದ ಪೊಲೀಸ್ ಅಧಿಕಾರಿಗಳ ಕಣ್ಣೇದುರೇ ಪೊಲೀಸ್ ಜೀಪಿನೊಳಗೆ ನುಗ್ಗಿ ಹಲ್ಲೆ ನಡೆಸುವ ಲೆವೆಲ್ಲಿಗೆ ಮತಾಂಧ ಶಕ್ತಿಗಳು ತಲುಪಲು ಮುಖ್ಯ ಕಾರಣ ತಾವು ಏನೂ ಮಾಡಿದರೂ ಸರಕಾರ, ಸ್ಥಳೀಯ ಜನಪ್ರತಿನಿಧಿಗಳು ತಮ್ಮ ರಕ್ಷಣೆಗೆ ಇದ್ದಾರೆ ಎನ್ನುವ ಧೈರ್ಯ.
ಪೊಲೀಸರ… pic.twitter.com/qaz5Z7ooxi
— Nalinkumar Kateel (@nalinkateel) August 22, 2026
ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಇಲಾಖೆಯ ವಾಹನದಲ್ಲೇ ದೌರ್ಜನ್ಯ ನಡೆದಿದ್ದರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.ಆರೆಸ್ಸೆಸ್ ಮತ್ತು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿ ದ್ವೇಷದ ರಾಜಕಾರಣದಲ್ಲಿ ತೊಡಗಿರುವ ಗೃಹ ಸಚಿವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಗಂಭೀರ ಗೂಂಡಾಗಿರಿ ಘಟನೆಗಳು ಕಣ್ಣಿಗೆ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ವಾಗ್ವಾದ, ಹಲ್ಲೆ: ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೂ ದೂರು ದಾಖಲು
ಘಟನೆ ನಡೆದ ಸಂತ್ರಸ್ತೆಯ ಮನೆಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಭೇಟಿ ನೀಡಿ ಧೈರ್ಯ ತುಂಬಿದ್ದು, ಅಪರಾಧಿಗಳ ವಿರುದ್ಧ ಯಾವುದೇ ದಾಕ್ಷಿಣ್ಯವಿಲ್ಲದೆ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರನ್ನು ಒತ್ತಾಯಿಸಿದ್ದಾರೆ.

